ಕಾಪು(ಉಡುಪಿ): ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಚಿತ್ರನಟಿ ರಕ್ಷಿತಾ ಭೇಟಿ ನೀಡಿದರು. ದೇವಸ್ಥಾನಕ್ಕೆ ಆಗಮಿಸಿದ ಅವರು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಅವರು ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯ ಸಮ್ಮುಖದಲ್ಲಿ ಗೌರವಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ಬಳಿಕ ರಕ್ಷಿತಾ ಪ್ರೇಮ್ ಅನ್ನದಾನ ಸೇವೆ ನೀಡಿದರು. ನಂತರ ಇಷ್ಟಾರ್ಥ ಸಿದ್ಧಿಗಾಗಿ ಘಂಟಾನಾದ ಸೇವೆಯನ್ನು ಮಾಡಿದರು.
ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ರಕ್ಷಿತಾ ಪ್ರೇಮ್, "ಕಳೆದ ವಾರವಷ್ಟೇ ನನ್ನ ತಾಯಿ ಇಲ್ಲಿಗೆ ಬಂದು ಹರಕೆ ಹೊತ್ತುಕೊಂಡಿದ್ದರು. ನಾನು ಕೂಡಾ ಬರಬೇಕು ಅಂದುಕೊಂಡಿದ್ದೆ. ಆದರೆ, ಕಾಪುವಿನ ಅಮ್ಮ ನನ್ನನ್ನು ಇಷ್ಟು ಬೇಗ ಇಲ್ಲಿಗೆ ಕರೆಸಿಕೊಳ್ಳುತ್ತಾಳೆ ಅಂದುಕೊಂಡಿರಲಿಲ್ಲ. ದೇವಿ ದರ್ಶನ ಮಾಡಿ ಬಹಳ ಖುಷಿಯಾಗಿದೆ. ಈ ದೇವಸ್ಥಾನ ಬಹಳ ಸುಂದರವಾಗಿ ಮೂಡಿ ಬಂದಿದೆ" ಎಂದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ, ಘಂಟಾನಾದ ಸೇವಾ ಸಮಿತಿಯ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಮಾಧವ ಆರ್. ಪಾಲನ್, ರವೀಂದ್ರ ಮಲ್ಲಾರ್, ಚರಿತ ದೇವಾಡಿಗ, ಪ್ರಚಾರ ಸಮಿತಿಯ ಸಂಚಾಲಕ ಜಯರಾಮ್ ಆಚಾರ್ಯ ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ: ಎಮ್ಮೆಗಳನ್ನು ನೀಡುವುದಾಗಿ ನಿರ್ದೇಶಕ ಪ್ರೇಮ್ಗೆ ಲಕ್ಷಾಂತರ ರೂ. ದೋಖಾ!; ಎಫ್ಐಆರ್ ದಾಖಲು